Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಅಕ್ಟೋಬರ್ 3 ರಿಂದ 14 ರ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವ, ಈ ಬಾರಿ ಹಾಫ್ ಮ್ಯಾರಥಾನ್ ವಿಶೇಷ.

ಅಕ್ಟೋಬರ್ 3 ರಿಂದ 14 ರ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವ, ಈ ಬಾರಿ ಹಾಫ್ ಮ್ಯಾರಥಾನ್ ವಿಶೇಷ.
ಮಂಗಳೂರು: "ಮಂಗಳೂರು ದಸರಾ" ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14 ರ ವರೆಗೆ ನಡೆಯಲಿದ್ದು, ದಸರಾ ವಿಶೇಷವಾಗಿ ಅ.6 ರಂದು ಹಾಫ್ ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ಕುದ್ರೋಳಿ ಕ್ಷೇತ್ರದಲ್ಲಿ ನಿನ್ನೆ ಅಪರಾಹ್ನ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1991ರಿಂದ ಆರಂಭಗೊಂಡ 'ಮಂಗಳೂರು ದಸರಾ ವೈಭವ' ಕುದ್ರೋಳಿ ಗೋಕರ್ಣನಾಥನ ಕೃಪೆಯೊಂದಿಗೆ ಯಶಸ್ವಿಯಾಗಿ ನಡೆಯುತ್ತಿದೆ. ಇದನ್ನು ಈ ಹಂತಕ್ಕೆ ಬೆಳೆಸಿದವರು ಜನರು ಎಂದರು.
ಮಂಗಳೂರು ದಸರಾ ಬಗ್ಗೆ ಮಾಹಿತಿ ನೀಡಿದ ದೇವಸ್ಥಾನ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆ‌ರ್., ಈ ಬಾರಿ ಅ.3 ರಂದು ದಸರಾ ರೂವಾರಿ ಜನಾರ್ದನ ಪೂಜಾರಿಯವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಅದೇ ದಿನ ಶಾರದೆ, ನವದುರ್ಗೆಯರ ಪ್ರತಿಷ್ಠೆ ನಡೆಯಲಿದೆ. ದಸರಾ ಸಂದರ್ಭ ಪ್ರತಿದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನೂರಾರು ಕಲಾವಿದರು ಕಾರ್ಯಕ್ರಮ ನೀಡಲಿದ್ದಾರೆ. ಈ ಬಾರಿ ವಿಶೇಷ ಎನ್ನುವಂತೆ, ಅ.4 ರಂದು ಬಹುಭಾಷಾ ಕವಿಗೋಷ್ಟಿ ನಡೆಯಲಿದ್ದು, ಹತ್ತು ಭಾಷೆಗಳಲ್ಲಿ ಕವಿಗಳು ತಮ್ಮ ಕವನ ಮಂಡಿಸಲಿದ್ದಾರೆ ಎಂದರು. ದಸರಾ ಕೊನೆಯಲ್ಲಿ ಮೈಸೂರು ದಸರಾವನ್ನೇ ನೆನಪಿಸುವಂತೆ ತುಳುನಾಡಿನ ಸಂಸ್ಕೃತಿಗೆ ಅನುಗುಣವಾಗಿ ಅ.13 ರಂದು ವೈಭವದ ಶಾರದಾ ವಿಸರ್ಜನಾ ಶೋಭಾಯಾತ್ರೆ ನಡೆಯಲಿದೆ. ಇದಕ್ಕಾಗಿ ನಗರದಾದ್ಯಂತ 9 ಕಿಮೀ ಉದ್ದಕ್ಕೆ ದೀಪಾಲಂಕಾರವೂ ಆಗಲಿದ್ದು, ಹತ್ತು ದಿನಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡಲಿದ್ದಾರೆ ಎಂದವರು ಹೇಳಿದರು.
21 ಕಿ.ಮೀ. ಹಾಫ್ ಮ್ಯಾರಥಾನ್. ದಸರಾ ಪ್ರಯುಕ್ತ ಕಳೆದ ವರ್ಷ ವಾಕಥಾನ್ ನಡೆಸಲಾಗಿದ್ದು, ಈ ಬಾರಿ ಅ.6 ರಂದು ಬೆಳಗ್ಗೆ 5.30ಕ್ಕೆ ಕ್ಷೇತ್ರದಿಂದ 21 ಕಿ.ಮೀ.ಗಳ ಹಾಫ್ ಮ್ಯಾರಥಾನ್ ಆಯೋಜಿಸಲಾಗಿದೆ. ದೇಶದ ವಿವಿಧ ಭಾಗಗಳಿಂದ ಮ್ಯಾರಥಾನ್ನಲ್ಲಿ ಸುಮಾರು 2000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಪದ್ಮರಾಜ್ ಮಾಹಿತಿ ನೀಡಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಮಂಗಳೂರು ದಸರಾ ಮಹೋತ್ಸವ ಹಾದು ಹೋಗುವ ರಸ್ತೆ ಸೇರಿದಂತೆ ನಗರದ ಕಟ್ಟಡಗಳನ್ನು ಅಲಂಕರಿಸುವ ಮೂಲಕ ಮಹೋತ್ಸವಕ್ಕೆ ಮತ್ತಷ್ಟು ವೈಭವ ತುಂಬಬೇಕು. ಕಳೆದ ಮೂರು ವರ್ಷಗಳಿಂದ ದೀಪಾಲಂಕಾರ ಮಹಾನಗರ ಪಾಲಿಕೆಯಿಂದ ಮಾಡಲಾಗಿದ್ದು ಈ ಸಲವೂ ಪಾಲಿಕೆಯಿಂದ ಅಲಂಕಾರ ಮಾಡಲಾಗುತ್ತಿದೆ ಎಂದು ಹೇಳಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ಸಂತೆಗಿಲ್ಲ ಅವಕಾಶ ! ದಸರಾ ವೇಳೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವುದರಿಂದ ಇತ್ತೀಚೆಗೆ ನಡೆದ ಕ್ಷೇತ್ರದ ಸಮಿತಿ ಸಭೆಯಲ್ಲಾದ ನಿರ್ಣಯದಂತೆ ದ್ವಾರದ ಒಳಭಾಗದಲ್ಲಿ ಸಂತೆಗೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ. ಭಕ್ತರ ದಟ್ಟಣೆ ಆಗದಂತೆ ಸೂಕ್ತ ಅವಕಾಶ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತರಿಗೆ ಮಾಹಿತಿ ನೀಡಲಾಗಿದೆ. ದೇವಸ್ಥಾನದ ಆವರಣದಲ್ಲಿ ಹರಾಜು ಮೂಲಕ ಜಾತ್ರಾ ಸಂತೆಗೆ ಅವಕಾಶ ಕಲ್ಪಿಸಲಾಗುತ್ತಿತ್ತು. ಈ ಹಣವನ್ನು ಕ್ಷೇತ್ರದ ಅಭಿವೃದ್ಧಿಗೆ ಬಳಸಲಾಗುತ್ತಿತ್ತು. ಆದರೆ ಈ ಬಾರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ಮನಪಾಕ್ಕೆ ಒಳಪಟ್ಟ ರಸ್ತೆಯಲ್ಲಿ ಮನಪಾ ವತಿಯಿಂದ ಹರಾಜು ಮೂಲಕ ಸಂತೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪದ್ಮರಾಜ್ ಉತ್ತರಿಸಿದರು.
ಸುದ್ದಿಗೋಷ್ಠಿಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕ‌ರ್ ಮಿಜಾರು, ಎಂ. ಶೇಖರ್ ಪೂಜಾರಿ, ಜಗದೀಪ್ ಡಿ. ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಉಪಾಧ್ಯಕ್ಷೆ ಡಾ. ಅನಸೂಯ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷರಾದ ಬಿ.ಜಿ. ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಸದಸ್ಯರಾದ ಕಿಶೋರ್ ದಂಡಕೇರಿ, ವಾಸುದೇವ ಕೋಟ್ಯಾನ್, ಎಚ್.ಎಸ್. ಜೈರಾಜ್, ಲತೀಶ್ ಎಂ. ಸುವರ್ಣ, ರಾಧಾಕೃಷ್ಣ, ಲೀಲಾಕ್ಷ ಕರ್ಕೇರ, ಚಂದನ್ ದಾಸ್‌, ಗೌರವಿ ರಾಜಶೇಖ‌ರ್ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.